ನಗೆ ನಗಾರಿ ಡಾಟ್ ಕಾಮ್

ಸ್ಕೂಪ್: ಉತ್ತಮ ಸಮಾಜಕ್ಕಾಗಿ ಟಿವಿ ೯ ?

April 26, 2008 · 6 Comments

(ನಗಾರಿ ತನಿಖಾ ಬ್ಯೂರೋ)

‘ಉತ್ತಮ ಸಮಾಜಕ್ಕಾಗಿ’ ಎಂಬ ಪಂಚಿಂಗ್ ಹಾಗೂ ಪರಿಣಾಮಕಾರಿ ಸ್ಲೋಗನ್ನನ್ನು ಹೊತ್ತುಕೊಂಡು ಕನ್ನಡದಲ್ಲಿ ಕಣ್ತೆರದದ್ದು ಟಿವಿ ೯ ಸುದ್ದಿ ಚಾನಲ್ಲು. ಇದು ಶುರುವಾಗಿ ಈಗಾಗಲೇ ತುಂಬಾ ದಿನಗಳು ಕಳೆದಿವೆ. ಈ ಸಂದರ್ಭದಲ್ಲಿ ಈ ಚಾನಲ್ಲಿನಿಂದ ಸಮಾಜ ಎಷ್ಟು ‘ಉತ್ತಮ’ವಾಗಿದೆ ಎಂಬುದನ್ನು ಪತ್ತೆಹಚ್ಚುವುದಕ್ಕೆ ನಗೆ ಸಾಮ್ರಾಟರು ತಮ್ಮ ಪತ್ತೇದಾರಿಕೆಯ ಚೇಲ ಕುಚೇಲನನ್ನು ಕಟ್ಟಿಕೊಂಡು ಅಜ್ಞಾತ ಪ್ರದೇಶಕ್ಕೆ ಪಲಾಯನಗೈದಿದ್ದಾರೆ.

‘ರಾಜಕಾರಣಿಗಳೇ ಎಚ್ಚರ..! ಮಾತಾಡುವ ಮುನ್ನ ಯೋಚಿಸಿ’ ಎಂದು ಚುನಾವಣೆಯ ಕಾವು ಜ್ವರದಂತೆ ಏರುತ್ತಿರುವ ಸಂದರ್ಭದಲ್ಲಿ ರೋಫ್ ಹಾಕುತ್ತಿರುವ ಈ ಸುದ್ಧಿ ಮಾಧ್ಯಮ ಆಶ್ವಾಸನೆಗಳನ್ನು ನೀಡುವಂತಹ ಪಕ್ಷಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳಲು ತೋಳು ಮೇಲೇರಿಸುತ್ತಿದೆ. ಅವರ ಈ ಉತ್ಸಾಹ, ಆರ್ಭಟಕ್ಕೆ ಕಾರಣವನ್ನು, ಪ್ರೇರಣೆಯನ್ನೂ ಪತ್ತೆ ಹಚ್ಚಬೇಕೆಂದು ಮೂಲವನ್ನು ಹುಡುಕಿಹೊರಟ ಸಾಮ್ರಾಟ್ ಹಾಗೂ ಕುಚೇಲರಿಗೆ ಅಪಾರ ಶ್ರಮದ ನಂತರ ಉತ್ತರ ಸಿಕ್ಕೇ ಬಿಟ್ಟಿತು. ರಾಜಕಾರಣಿಗಳ ಕೊರಳ ಪಟ್ಟಿಯನ್ನು ಹಿಡಿದುಕೊಂಡು ಬರೀ ಆಶ್ವಾಸನೆಗಳನ್ನು ಕೊಟ್ಟಿರೋ ಹುಶಾರ್! ಆಶ್ವಾಸನೆಗಳನ್ನು ಕಾರ್ಯರೂಪಕ್ಕೆ ತರದಿದ್ದರೆ ನಿಮ್ಮ ತಲೆಗಳನ್ನು ಹಾರಿಸಿಯೇವು ಎಂದು ಬೀಗುತ್ತಿರುವುದರ ಹಿಂದಿನ ನೈತಿಕ ಶಕ್ತಿ ದೊರೆತಿರುವುದು ಇವರು ತಮ್ಮ ಆಶ್ವಾಸನೆಯಾದ ‘ಉತ್ತಮ ಸಮಾಜಕ್ಕಾಗಿ ಟಿವಿ ೯’ ನ್ನು ಸಂಪೂರ್ಣವಾಗಿ ಕಾರ್ಯರೂಪಕ್ಕೆ ತಂದಿರುವುದೇ ಆಗಿದೆ.

ಸುದ್ದಿ ಎಂದರೆ ಅವರಿವರಿಂದ ಕೇಳಿದ್ದು, ರಾತ್ರಿ ಕಾದು ಮನೋರಂಜನೆಯ ಕಾಂಟ್ರಾಕ್ಟ್ ತೆಗೆದುಕೊಂಡ ಚಾನಲ್ಲುಗಳಲ್ಲಿ ಪ್ರಸಾರವಾಗುವ ಸುದ್ಧಿಯನ್ನು ನೋಡಿ ತಿಳಿಯುವುದು, ರಾತ್ರಿ ನಿರಾಳವಾಗಿ ನಿದ್ದೆ ಮಾಡಿ ಎದ್ದು ಬೆಳಿಗ್ಗೆ ಪೇಪರ್ ಓದುವುದು ಎಂದು ತಿಳಿದಿದ್ದ ಸಾಮಾನ್ಯ ಜನೆತೆಗೆ ಸುದ್ಧಿಯ ಬಗ್ಗೆ ಅರಿವನ್ನು ಮೂಡಿಸಿದ ಆ ಮೂಲಕ ಉತ್ತಮ ಸಮಾಜ ಕಟ್ಟುವಲ್ಲಿ ಈ ಚಾನಲ್ಲು ತೆಗೆದುಕೊಂಡ ಶ್ರಮವನ್ನು ಇಲ್ಲಿ ನೆನೆಯಲೇ ಬೇಕು. ‘ಗಂಡನಿಗೆ ಹೆಂಡತಿಯ ಮೇಲೆ ಸಂಶಯ… ಕೊಲೆ’, ‘ಕರ್ನಾಟಕದವರು ಕಚಡಾಗಳು: ಮಾನ್ಯ ಮಂತ್ರಿ’, ‘ತಾಕತ್ತಿದ್ದರೆ ಹೀಗೆ ಮಾಡಿ: ಅನಾಮಿಕ’ ಎಂಬಂಥ ಫ್ಲಾಶ್, ಬ್ರೇಕಿಂಗ್ ಸುದ್ದಿಗಳನ್ನು ಅಪಾರ ಆಸಕ್ತಿಯಿಂದ ಜನರು ನೋಡಲು ಶುರುಮಾಡಿರುವುದು ಉತ್ತಮ ಸಮಾಜ ಕಟ್ಟುವ ಕೆಲಸದ ಮೊದಲ ಹಂತ. ಅದನ್ನು ಟಿವಿ ೯ ಯಶಸ್ವಿಯಾಗಿ ನಿರ್ವಹಿಸಿದೆ.

ಹಾಲಿವುಡ್ಡು, ಬಾಲಿವುಡ್ಡು, ಸ್ಯಾಂಡಲ್‌ವುಡ್ಡು, ಕಾಲಿವುಡ್ಡು ಎಂದು ಏನೇನೋ ಹೊಸ ಪದಗಳನ್ನು ಮೇಲಿಂದ ಮೇಲೆ ಹೇಳುತ್ತಾ, ಬಿಡುಗಡೆಯಾಗುವ(ಎಲ್ಲಿಂದ?) ಸಿನೆಮಾದ ನಾಯಕರನ್ನು, ಹಣ ಕೊಟ್ಟ ನಿರ್ಮಾಪಕರನ್ನು ಕರೆಸಿಕೊಂಡು ಹರಟೆ ಹೊಡೆದು ನಾಲ್ಕೈದು ಹಾಡುಗಳನ್ನು ಹಾಕಿ, ಅಡ್ವರ್ಟೈಸ್‌ಮೆಂಟಿನ ನಡುವೆ ಸಮಯ ಮಾಡಿಕೊಂಡು ಚಿತ್ರದ ದೃಶ್ಯಗಳನ್ನು ತೋರಿಸಿ ಜನರನ್ನು ರಂಜಿಸುತ್ತಾ ಜನರು ವಾಸ್ತವದ ಕಷ್ಟನಷ್ಟಗಳು, ಬೆಳೆದ ಬೆಲೆಗೆ ಬೆಲೆಯಿಲ್ಲದ ಕಂಗಾಲಾದ ರೈತ ತನ್ನ ಬವಣೆಯನ್ನು, ಹೋರಾಟದ ಯೋಜನೆಯನ್ನೆಲ್ಲಾ ಮರೆತು ಬಣ್ಣದ ಲೋಕದಲ್ಲಿ ವಿಹರಿಸುತ್ತಾ ಪಲಾಯನವಾದಿಯ ಶ್ರೇಷ್ಠ ಸ್ಥಾನವನ್ನೇರಲು ಟಿವಿ ೯ ಕೈಲಾದಷ್ಟು ನೆರವು ನೀಡುತ್ತಿರುವುದು ಅದರ ಎರಡನೆಯ ಹಂತದ ಸಾಧನೆಯ ಫಲ.

ವರ್ಷಾನುಗಟ್ಟಲೆ ಮುಂದಾಳುಗಳ ಗರಡಿಯಲ್ಲಿ ಪಳಗಿ, ಸಿದ್ಧಾಂತ-ಪ್ರತಿ ಸಿದ್ಧಾಂತಗಳನ್ನು ಅರೆದುಕುಡಿದು, ಸಮಸ್ಯೆಗಳನ್ನು ಅನುಭವಿಸುತ್ತಿರುವವರ ಹತ್ತಿರ ನೇರವಾಗಿ ಹೋಗಿ ಬೆರೆತು ಅವರ ಸಮಸ್ಯೆಯ ಮೂಲಗಳನ್ನು ಅರಿತು, ಆಳವಾದ ಅಧ್ಯಯನವನ್ನು ಮಾಡಿ, ಬೇರಿನ ಮಟ್ಟದಿಂದ ಸಂಘಟನೆಯನ್ನು ಮಾಡುತ್ತಾ ಬೆಳೆದು ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವ, ಚಳುವಳಿಗಳನ್ನು ಆಯೋಜಿಸುವ ನಾಯಕರು, ಮುತ್ಸದ್ಧಿಗಳಿಂದಾಗಿ ಪ್ರತಿಕ್ರಿಯೆ ಹಾಗೂ ಪ್ರತಿಭಟನೆ ತುಂಬಾ ದೀರ್ಘಕಾಲವನ್ನು ಅಪೇಕ್ಷಿಸುತ್ತದೆ ಎಂಬುದನ್ನು ತಮ್ಮ ‘ಆಳ’ವಾದ ಅಧ್ಯಯನದಿಂದ ಕಂಡುಕೊಂಡ ಟಿವಿ ೯ರ ನೇತಾರರು ದಿಢೀರ್ ಚಳುವಳಿಗಾರರನ್ನು ಪ್ರೋತ್ಸಾಹಿಸುವ ಕ್ರಾಂತಿಕಾರಕ ಯೋಜನೆಯನ್ನು ಹಮ್ಮಿಕೊಂಡರು. ಫಾಸ್ಟ್ ಫುಡ್, ಫಾಸ್ಟ್ ಲೈಫ್ ಸ್ಟೈಲ್ ಅಲ್ಲದೆ ಕ್ರಿಕೆಟ್ಟಿನಲ್ಲೂ ಫಾಸ್ಟಾದ ಟಿ೨೦ ಬಂದಿರುವಾಗ ಈ ಚಳುವಳಿ, ಪ್ರತಿಭಟನೆಗಳ್ಯಾಕೆ ಗಂಭೀರವಾಗಿರಬೇಕು ಎಂದು ಯೋಚಿಸಿ ಇವರು ನಾಡಿನಾದ್ಯಂತ ಹುಟ್ಟಿಕೊಂಡ ಅಸಂಖ್ಯ ವೇದಿಕೆ, ಸೇನೆ, ಪಡೆ, ದಳಗಳಿಗೆ ವಿಶೇಷ ಆದ್ಯತೆಯನ್ನು ನೀಡಿತು. ಅದರಲ್ಲೂ ಪ್ರತಿಭಟನೆಯೆಂಬುದು ಕೇವಲ ಬಾಯಿ ಮಾತಾಗಬಾರದು ‘ಕಾಯಾ’ ವಾಚಾ ಮನಸಾ ನಡೆಯಬೇಕು. ಹಾಗಾಗಿ ಸುಮ್ಮನೆ ಒಂದೆಡೆ ಕುಳಿತು ಪ್ರತಿಭಟನೆಯನ್ನು ದಾಖಲಿಸುವುದು, ಯಾರದೋ ಸಮಸ್ಯೆಗಾಗಿ ತಾವು ಉಪವಾಸ ಕುಳಿತುಕೊಳ್ಳುವುದು, ಸತ್ಯಕ್ಕಾಗಿ ಆಗ್ರಹಿಸುವುದು ಎಲ್ಲವೂ ‘ಅವೈಜ್ಞಾನಿಕ’ ಹಾಗೂ ‘ಅಪ್ರಾಯೋಗಿಕ’ ಎಂಬುದನ್ನು ಕಂಡುಕೊಂಡ ಇವರು ಮೇಜು, ಕುರ್ಚಿ, ಕಂಪ್ಯೂಟರುಗಳನ್ನು ಪುಡಿಪುಡಿ ಮಾಡುವುದನ್ನೂ, ಕಲ್ಲೆಸೆದು ಅನ್ಯಾಯ ಮಾಡುವವರ ಕೈ, ಕಾಲು, ಕಣ್ಣುಗಳಿಗಾಗಿ ‘ಆಗ್ರಹ’ ಮಾಡುವುದನ್ನು ಬೆಂಬಲಿಸಿ ಆ ‘ಹೋರಾಟ’ಗಳಿಗೆ ಪೂರ್ಣ ಪ್ರಮಾಣದ ಕವರೇಜ್ ಕೊಟ್ಟು ಉತ್ತಮ ಸಮಾಜಕ್ಕಾಗಿ ಈ ವಾಹಿನಿ ನಡೆಸುತ್ತಿರುವ ಪ್ರಯತ್ನ ಗಮನ ಸೆಳೆದಿದೆ.

ನ್ಯಾಯ, ನೀತಿಗಾಗಿ, ಅಪರಾಧ-ಶಿಕ್ಷೆ ತೀರ್ಮಾನಕ್ಕಾಗಿ ಪೋಲೀಸು, ಕೋರ್ಟುಗಳನ್ನು ನಂಬಿಕೊಂಡು ವರ್ಷಗಳ ಕಾಲ ಅಲೆದಾಡುವುದರಿಂದ ಸಮಾಜ ಕಷ್ಟ ಅನುಭವಿಸುತ್ತಿದೆ ಎಂಬುದನ್ನು ಗಮನಿಸಿದ ಟಿವಿ ಒಂಭತ್ತು ಇದಕ್ಕೊಂದು ಪರಿಹಾರವನ್ನು ಕಂಡುಕೊಂಡಿದೆ. ಮನೆಯಲ್ಲಿ ಸಿಕ್ಕ ಕಳ್ಳನನ್ನು, ವರದಕ್ಷಿಣೆಗಾಗಿ ಪೀಡಿಸಿದ ಗಂಡನ ಮನೆಯವರನ್ನು, ವಂಚನೆ ಮಾಡಿದ ಲೇವಾದೇವಿಗಾರನನ್ನು, ಕಾಮುಕ ಶಿಕ್ಷಕನನ್ನು ಜನರೇ ಬೀದಿಗೆಳೆದು ಹಿಗ್ಗಾಮುಗ್ಗಾ ಬಾರಿಸುವ, ತಾವಾಗಿ ಶಿಕ್ಷೆಯನ್ನು ತೀರ್ಮಾನಿಸುವ ಹೊಸ ಪದ್ಧತಿಯನ್ನು ಅದು ಬೆಂಬಲಿಸುತ್ತಿದೆ. ಇದರಿಂದಾಗಿ ಜನರಿಗೆ ‘ತ್ವರಿತ’ಗತಿಯಲ್ಲಿ ನ್ಯಾಯ ಸಿಕ್ಕುವುದಲ್ಲದೆ ಆರೋಪಿಗೂ ತಕ್ಕ ಶಿಕ್ಷೆ ಸಿಕ್ಕುತ್ತದೆ ಎಂಬುದು ಇವರ ವಿಚಾರ. ಹೀಗಾಗಿ ಎಲ್ಲೋ ಒಂದು ಕಡೆ ಒಬ್ಬನು ವಂಚನೆ ಮಾಡುತ್ತಿದ್ದಾನೆ ಎಂದರೆ ಜನರನ್ನು ಈ ಬಗೆಯ ಹೋರಾಟಕ್ಕೆ ಸಿದ್ಧ ಮಾಡುವಂತೆ, ‘ಇವರಿಗೇನು ಮಾಡಬೇಕು? ಜನರೇ ತೀರ್ಮಾನಿಸಬೇಕು’ ಎಂದು ಪ್ರಚೋದಿಸಿ ಅವರು ವಂಚಕನಿಗೆ ತದಕುವುದನ್ನು ಲೈವ್ ಕವರೇಜ್ ಮಾಡಿ ‘ಜನರ ತೀರ್ಮಾನ’ವನ್ನು ತೋರಿಸಿ ಕೃತಾರ್ತರಾಗುತ್ತಿದ್ದಾರೆ. ಇದೂ ಸಹ ಉತ್ತಮ ಸಮಾಜಕ್ಕಾಗಿ ಟಿವಿ ೯ರ ಕೊಡುಗೆ.

ಆತ್ಮಕಥೆಯೊಂದು ಪ್ರಕಟವಾಗಿ ಅದನ್ನು ಓದುವ ಸಮಯವಿದ್ದವರು ಓದಿ ಅದರಲ್ಲಿನ ಆಕ್ಷೇಪಾರ್ಹ ಸಂಗತಿಗಳನ್ನು ಚರ್ಚಿಸಿ ಅವುಗಳ ವಿರುದ್ಧ ಮಾತನಾಡುವ, ಉದ್ದೇಶ ಪೂರಿತವಾಗಿ ಹೆಸರಿಗೆ ಮಸಿ ಬಳಿಯುವ ಪ್ರಯತ್ನಕ್ಕೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನು ಹಾಕುವ ಕೆಲಸಗಳು ತುಂಬಾ ಸಮಯ ತಿನ್ನುತ್ತವೆ. ಇದರಿಂದ ಯಾರಿಗೂ ಲಾಭವಾಗುವುದಿಲ್ಲ ಎಂಬ ಸಂಗತಿಯನ್ನು ಸೂಕ್ಷವಾಗಿ ಅವಲೋಕಿಸಿದ ಈ ವಾಹಿನಿ ಆತ್ಮಕಥೆಯೊಂದು ಬಿಡುಗಡೆಯಾಗುವ ಮೊದಲೇ ಅದರಲ್ಲೇನಿದೆ ಎಂಬುದನ್ನು ದಿನವಿಡೀ ಪ್ರಸಾರ ಮಾಡಿ, ಆ ಪುಸ್ತಕವನ್ನು ನೋಡಿಯೇ ಇರದ, ಒಂದೇ ಒಂದು ಪುಟವನ್ನೂ ಓದದವರೆಲ್ಲಾ ಕೈಲಿ ಪ್ರತಿಭಟನೆಯ ‘ಅಸ್ತ್ರ’ಗಳನ್ನು ಹಿಡಿದುಕೊಂಡು ಬಂದು ಪುಸ್ತಕ ಬಿಡುಗಡೆಯ ಕಾರ್ಯಕ್ರಮವನ್ನೇ ರದ್ದುಗೊಳಿಸುವಲ್ಲಿ ಯಶಸ್ವಿಯಾಗುವಲ್ಲಿ ಸಹಕರಿಸಿದ ವಾಹಿನಿ ನಿಜಕ್ಕೂ ಉತ್ತಮ ಸಮಾಜ ಕಟ್ಟುವಲ್ಲಿ ಅಪಾರ ಶ್ರಮವಹಿಸುತ್ತಿದೆ.

ಇಷ್ಟು ಸತ್ಯಗಳನ್ನು ಪತ್ತೆ ಮಾಡುವಷ್ಟರಲ್ಲಿ ಸಾಮ್ರಾಟರೂ, ಅವರ ಪತ್ತೇದಾರಿಕೆಯ ಚೇಲ ಕುಚೇಲನೂ ಸುಸ್ತು ಹೊಡೆದು ಹೋದರು. ಆದರೂ ಸುದ್ದಿಯ ಹೆಸರಿನಲ್ಲಿ ಗಲ್ಲಿ ಗಾಸಿಪ್, ‘ಹೀಗೂ, ಈಗೂ ಉಂಟೆ’, ರಸ್ತೆ ಬದಿಯ ಕ್ರಿಕೆಟ್ ಅಭಿಮಾನಿಗಳ ಆಟದ ವಿಶ್ಲೇಷಣೆಗಳು ಮುಂತಾದ ಸಾಧನೆಗಳ ಬಗ್ಗೆ ಹಾಗೂ ಅವು ಉತ್ತಮ ಸಮಾಜಕ್ಕಾಗಿ ನೀಡುತ್ತಿರುವ ಕೊಡುಗೆಗಳ ಕುರಿತು ಇನ್ನೊಮ್ಮೆ ಪತ್ತೆದಾರಿಕೆ ಮಾಡಬೇಕೆಂದು ತೀರ್ಮಾನಿಸಿದರು.

Categories: ಹಾಸ್ಯ ಲೇಖನ
Tagged: , , , ,

6 responses so far ↓

  • sushma // April 29, 2008 at 8:10 pm | Reply

    i don’t think, whatever you have written here is true…tv 9 channel has very good name,cause it is very famous for blackmailing people for money ….i am sure abt it coz they have blackmaled my close relative for 5 laks which news was based on lie…so our relative refused to give the money and they have published the news which was big lie….i dont really trust TV9…

  • supreeth ks // April 29, 2008 at 8:33 pm | Reply

    ತುಂಬಾ ವಿವೇಚನಾಪೂರ್ಣ ಸ್ಕೂಪ್ ಇದು. ನಿಮ್ಮ ಚೇಲ ಕುಚೇಲ ತನಿಖಾ ವರದಿ ಮಾಡುವುದರಲ್ಲಿ ನಿಸ್ಸೀಮ ಅನ್ನಿಸುತ್ತದೆ…

  • shailu // April 30, 2008 at 1:31 pm | Reply

    a correct, true analysis.. ur views are nera.. ditta.. niranthara..?

  • nagenagaaridotcom // April 30, 2008 at 5:25 pm | Reply

    Dear sushma,
    Its a grave mistake from our part to ignore a very important but very trivial symbol, ie, `?’. We should have included that in the heading….
    thank you very much for your input… this would strenghen nagesamrat`s detective instincts….

    nage samrat

  • nagenagaaridotcom // April 30, 2008 at 5:30 pm | Reply

    ಸುಪ್ರೀತರೇ,
    ನಮ್ಮ ಚೇಲ ಕುಚೇಲನಿಗೆ ನಿಮ್ಮ ಹೊಗಳಿಕೆಯ ಮಾತು ಕೇಳಿ ಹೊಟ್ಟೆ ಊದಿಕೊಂಡಿದೆ… ಡಾಕ್ಟರ್ ಬಳಿಗೆ ಕರೆದೊಯ್ಯುತ್ತಿದ್ದೇವೆ… ಡಾ|ವಿಜಯ ಮಲ್ಯರ ಬಳಿಗೆ…!

    ನಗೆ ಸಮ್ರಾಟ್

  • nagenagaaridotcom // April 30, 2008 at 5:42 pm | Reply

    ಶೈಲುರವರೇ,
    ನಮ್ಮ ತನಿಖಾವರದಿಯ ಹಾದಿ ತಪ್ಪಿಸುವ ಗಂಭೀರ ಆರೋಪವನ್ನು ನಿಮ್ಮ ಮೇಲೆ ಹೊರಿಸಲಾಗುತ್ತಿದೆ. “ಚೋರ- ಸುಟ್ಟ- ಅವಾಂತರ’ ಎಂಬುದು ನಮ್ಮ ಧ್ಯೇಯ ವಾಕ್ಯ. ಈ ಧ್ಯೆಯವನ್ನು ತಪ್ಪಾಗಿ ಬಳಸುವ ಮುಖಾಂತರ ನಮ್ಮ ಮುಖಕ್ಕೆ ಮಸಿ ಬಳಿಯುವ ಪ್ರಯತ್ನಗಳು ನಡೆಯುತ್ತಿವೆ….

    ನಗೆ ಸಾಮ್ರಾಟ್

Leave a Comment